ಬೆಂಗಳೂರು: ಶೇ 50ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಒಬಿಸಿ ಸಮುದಾಯಕ್ಕೆ ಅವಕಾಶ ಮತ್ತು ಸೌಲಭ್ಯಗಳನ್ನು ನೀಡದೆ ಕಾಂಗ್ರೆಸ್ ಪಕ್ಷವು ವಂಚಿಸಿದೆ ಎಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಅವರು ಆರೋಪಿಸಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಕ್ಕೆ ನಿರಂತರವಾಗಿ ಮೋಸ ಮಾಡಿದೆ ಎಂದು ಟೀಕಿಸಿದರು. ಆದರೆ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪ್ರಯತ್ನದಿಂದ ಮೀಸಲಾತಿ ಲಭಿಸಿದೆ. ಹಿಂದುಳಿದ ವರ್ಗದವರು ವೈದ್ಯರಾಗುವ ಕನಸು ನನಸಾಗಿದೆ. ಗರಿಷ್ಠ ಸಂಖ್ಯೆಯ ಸಚಿವ ಸ್ಥಾನವನ್ನೂ ತಮ್ಮ ಸಂಪುಟದಲ್ಲಿ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಮೋದಿಜಿ ಅವರು ಅನೇಕ ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅನೇಕ ಐತಿಹಾಸಿಕ ಮತ್ತು ಮಹತ್ವಪೂರ್ಣ ನಿರ್ಣಯಗಳನ್ನು ಮೋದಿಜಿ ಅವರು ಕೈಗೊಂಡಿದ್ದಾರೆ. ಕರ್ನಾಟಕದಲ್ಲೂ ಅನೇಕ ಜನಹಿತದ ಯೋಜನೆಗಳು ಜಾರಿಗೊಂಡಿವೆ. ಮೋದಿಜಿ ಅವರಿಗೆ ಉಡುಗೊರೆ ಕೊಡಲು ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಬೇಕಿದೆ ಎಂದು ಮನವಿ ಮಾಡಿದರು.
ಕಾಕಾ ಕಾಲೇಕರ್ ಶಿಫಾರಸನ್ನು ಪ್ರಧಾನಿ ನೆಹರೂ ಅವರು ಕಡೆಗಣಿಸಿದ್ದರು. ಬಳಿಕ ಮಂಡಲ್ ಕಮಿಷನ್ ಶಿಫಾರಸನ್ನು ರಾಜೀವ್ ಗಾಂಧಿ ವಿರೋಧಿಸಿದ್ದರು. ಒಬಿಸಿಗೆ ಮೀಸಲಾತಿ ಕೊಡುವುದನ್ನು ಕಾಂಗ್ರೆಸ್ ಪಕ್ಷ ಬಯಸಲಿಲ್ಲ ಎಂದು ಟೀಕಿಸಿದರು. ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಒಬಿಸಿ ಸಮುದಾಯದವರನ್ನು ಸಂಘಟಿಸುತ್ತಿರುವ ರಾಜ್ಯ ಒಬಿಸಿ ಘಟಕವನ್ನು ಅಭಿನಂದಿಸಿದರು.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಅವರು ಮಾತನಾಡಿ, ಈ ಸಮಾವೇಶ ಒಬಿಸಿ ಸಮುದಾಯಗಳ ಹೃದಯ ಮಿಡಿತದ ಸಂಕೇತ. ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಯನ್ನು ಅವಕಾಶಗಳನ್ನು ಹಿಂದಿನ ಕಾಂಗ್ರೆಸ್ ಸರಕಾರವು ಕಡೆಗಣಿಸಿತ್ತು. ಆದರೆ, ನರೇಂದ್ರ ಮೋದಿಜಿ ಅವರ ಸರಕಾರವು ಒಬಿಸಿಗೆ ಗರಿಷ್ಠ ಅವಕಾಶ- ಪ್ರಾತಿನಿಧ್ಯ ಮತ್ತು ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ