ಬೆಂಗಳೂರು: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ ಮತ್ತು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಅವರು ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ವರುಣಾ ಕ್ಷೇತ್ರವನ್ನು ಸುತ್ತಾಡಿದ ತಮಗೆ ಕ್ಷೇತ್ರದ ಬಗ್ಗೆ ಸ್ವಲ್ಪ ಮಾಹಿತಿ ಇದೆ. ಮೈಸೂರಿಗೆ ಹೊಂದಿಕೊಂಡಿರುವ ಅನೇಕ ಭಾಗಗಳು ಇನ್ನೂ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಮೈಸೂರು ತನ್ನದೇ ಇತಿಹಾಸ ಹೊಂದಿದ್ದು, ಶಾಂತಿ – ನೆಮ್ಮದಿ, ಮೂಲಭೂತ ಸೌಕರ್ಯಗಳು ಅಗತ್ಯವಾಗಿವೆ ಎಂದು ತಿಳಿಸಿದರು.
ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಅನೇಕ ಮೂಲಭೂತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದೇ ಕೆಲಸವನ್ನು ಇಲ್ಲಿಯೂ ಮುಂದುವರೆಸಲು ಜನರು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ನಾಯಕರು ಅನೇಕ ವಿಚಾರಗಳನ್ನು ಕೈಗೆತ್ತಿಕೊಂಡು ಅರ್ಹತೆ ಇರುವ ಅನೇಕರಿಗೆ ಅವಕಾಶ ನೀಡಿದ್ದಾರೆ. ಸಾಮಾನ್ಯರೂ ಸಹ ಲೋಕಸಭೆ ಮತ್ತು ವಿಧಾನಸಭೆಗೆ ಹೋಗಬಹುದು ಎಂಬ ಸಂದೇಶವನ್ನು ಬಿಜೆಪಿ ನೀಡಿದೆ. ಶ್ರಮ, ಅನುಭವಗಳನ್ನು ಗುರುತಿಸಿ ಎರಡೂ ಕಡೆ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ತಮ್ಮ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಗೌಣ. ಎರಡೂ ಕಡೆ ಸಮನಾಗಿ ಸಮಯ ಮೀಸಲಿಟ್ಟು ಪ್ರಚಾರ ಮಾಡಲಿದ್ದೇನೆ. 17ರಂದು ವರುಣಾದಲ್ಲಿ, 19 ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದರು.
ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ. ಜನ್ಧನ್, ಕಿಸಾನ್ ಸಮ್ಮಾನ್, ವಿದ್ಯಾಸಿರಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಫಲಾನುಭವಿಗಳ ಸಮಾವೇಶಗಳನ್ನು ನಡೆಸಲಾಗಿದೆ. ಸ್ವಾತಂತ್ರ್ಯ ಬಂದ ನಂತರ ಎಲ್ಲ ವರ್ಗಗಳಿಗೆ ಸಮಾನತೆ ನೀಡಿದ್ದು ನರೇಂದ್ರ ಮೋದಿಯವರ ಸರ್ಕಾರ. ತರ್ಕಬದ್ಧತೆಯಿಂದ ಕಾನೂನು ಚೌಕಟ್ಟಿನಡಿ ಸಾಮಾನ್ಯರಿಗೂ ಅವಕಾಶಗಳನ್ನು ಒದಗಿಸುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ವಿ.ಸೋಮಣ್ಣ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ನಗರ ಜಿಲ್ಲಾಧ್ಯಕ್ಷ ಶ್ರೀವತ್ಸ, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಳಾ ಸೋಮಶೇಖರ್ ಮುಂತಾದವರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ