ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳÀ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸದಾ ಪರಿವರ್ತನೆ ಪಕ್ಷ. ದೇಶದ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಕಾಲದಿಂದ ಕಾಲಕ್ಕೆ ಬದಲಾವಣೆಗಳನ್ನು ತರುತ್ತಾ ಬಂದಿದೆ. 9 ವರ್ಷಗಳ ಹಿಂದೆ ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದಲ್ಲೇ 11 ಸ್ಥಾನದಲ್ಲಿದ್ದ ಭಾರತ, ಇದೀಗ 5 ನೇ ಪ್ರಬಲ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದೆ. ದೂರದೃಷ್ಟಿ ಮತ್ತು ಪರಿಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ನೋಟು ಅಮಾನ್ಯೀಕರಣ, ಜಿಎಸ್ಟಿ ಜಾರಿ, ಆತ್ಮನಿರ್ಭರತೆ, 25 ವರ್ಷಗಳ ದೂರದೃಷ್ಟಿ, ಅಮೃತಕಾಲ ಯೋಜನೆಗಳಿಂದ ದೇಶದ ಆರ್ಥಿಕತೆ ಸದೃಢವಾಗುತ್ತಿದೆ. ದೇಶದಲ್ಲಿ ಡಿಜಿಟಲ್ ನಗದು ಪಾವತಿ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಆದರೆ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಈ ವ್ಯವಸ್ಥೆಯನ್ನು ಜಾರಿಗೆ ತಂದಾಗ, ಜನರು ಇದನ್ನು ಬಳಸುವಷ್ಟು ವಿದ್ಯಾವಂತರಲ್ಲ ಎಂದು ಹೇಳಿದ್ದರು. ಸರಕು ಮತ್ತು ಸೇವಾ ತೆರಿಗೆ ಸಂಗ್ರಹ, ಸಾರ್ವಕಾಲಿಕ ಏರಿಕೆಯಾಗಿದ್ದು, ದೇಶದಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ. ಈ ಪರಿವರ್ತನೆಯನ್ನು ಕರ್ನಾಟಕದಲ್ಲೂ ಕಾಣಬಹುದು ಎಂದು ತಿಳಿಸಿದರು.
ಇಡೀ ದೇಶದಲ್ಲೇ ರಾಜ್ಯಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ. ಜಿಎಸ್ಟಿ ತಲಾದಾಯ, ಬಂಡವಾಳ ಹೂಡಿಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಕ್ರಿಯಾಶೀಲ ಬಜೆಟ್ ಮಂಡಿಸಿದ್ದು, ಇದು ಪ್ರಸಕ್ತ ಆರ್ಥಿಕ ವರ್ಷ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ಕರ್ನಾಟಕದ ಅಭಿವೃದ್ಧಿ ಸೂಚ್ಯಂಕ ಕುರಿತಂತೆ ಕಾಂಗ್ರೆಸ್ ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 75 ಮಂದಿ ಹೊಸಬರಿಗೆ ಅವಕಾಶ ನೀಡಿದೆ. ಇವರಲ್ಲಿ ಸಾಮಾನ್ಯರು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರು, ಯುವಜನರು ಇದ್ದಾರೆ. 224 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಹಿಂದೆ ವಿಶಿಷ್ಟ ಹಿನ್ನೆಲೆಯಿದೆ. ಜನರು ಇದನ್ನು ಸ್ವೀಕರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಕಾಂಗ್ರೆಸ್, ಡಿಎಂಕೆ, ಟಿಆರ್ಎಸ್, ಫಾರೂಕ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಹಲವು ಪಕ್ಷಗಳು ಕುಟುಂಬ ರಾಜಕಾರಣ ನಡೆಸುತ್ತಿವೆ. ಯಾವುದೇ ವಿಷಯ ಮನೆಗಳಲ್ಲೇ ನಿರ್ಣಯವಾಗುತ್ತದೆ ಎಂದು ಅಣ್ಣಾಮಲೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನಿ ಗೌಡ, ಪಕ್ಷದ ರಾಜ್ಯ ವಕ್ತಾರ ಡಾ.ಗಿರಿಧರ್ ಉಪಾಧ್ಯಾಯ ಅವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ