ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದೆ. ರಾಜ್ಯದಿಂದ ಕೋರ್ ಕಮಿಟಿ ತೀರ್ಮಾನ ಮಾಡಿ ಕಳುಹಿಸಿದ ಹೆಸರುಗಳಲ್ಲಿ 4 ಹೆಸರುಗಳನ್ನು ನಮ್ಮ ರಾಷ್ಟ್ರೀಯ ನಾಯಕರ ತಂಡ ಪ್ರಕಟಿಸಿದೆ. ಛಲವಾದಿ ನಾರಾಯಣಸ್ವಾಮಿ, ಶ್ರೀಮತಿ ಹೇಮಲತಾ ನಾಯಕ್, ಎಸ್.ಕೇಶವಪ್ರಸಾದ್ ಮತ್ತು ಲಕ್ಷ್ಮಣ ಸವದಿ ಪಕ್ಷದಿಂದ ಸ್ಪರ್ಧಿಸಲಿದ್ದು ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ಪಕ್ಷದ ರಾಜ್ಯ ಉಪಾಧ್ಯಕ್ಷರು, ಹೇಮಲತಾ ನಾಯಕ್ ಅವರು ಪಕ್ಷದ ಕಾರ್ಯದರ್ಶಿ, ಛಲವಾದಿ ನಾರಾಯಣಸ್ವಾಮಿ ಅವರು ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷರು, ಕೇಶವಪ್ರಸಾದ್ ಅವರು ಕಾರ್ಯದರ್ಶಿಗಳು ಮತ್ತು ಪ್ರಭಾರಿ ಎಂದು ವಿವರಿಸಿದರು. ನೈಋತ್ಯ ಕ್ಷೇತ್ರದ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರನ್ನು ಪ್ರಕಟಿಸಿದ್ದು, ಅವರಿಗೂ ಅಭಿನಂದನೆಗಳು ಎಂದರು.
ನರೇಂದ್ರ ಮೋದಿಯವರ ಸರಕಾರ ಅದ್ಭುತವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷದವರು ಬೆಲೆ ಏರಿಕೆ ವಿರುದ್ಧ ಟೀಕೆ ಮಾಡುತ್ತಿದ್ದರು. ಆದರೆ, ಕೇಂದ್ರ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಸುಂಕ ಕಡಿಮೆ ಮಾಡಿ ದರ ಕಡಿಮೆ ಆಗುವಂತೆ ಮಾಡಿದೆ. ಜೊತೆಗೆ ಎಲ್ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿ ಪ್ರಕಟಿಸಿರುವುದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದರು. ಆರ್ಥಿಕ ಸಂಕಷ್ಟದ ನಡುವೆ ಜನಪರವಾಗಿ ನರೇಂದ್ರ ಮೋದಿಯವರ ಸರಕಾರ ಸ್ಪಂದಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.
ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದೆ. ಕೆಲವೆಡೆ ನೆರೆ ಸಮಸ್ಯೆಯೂ ಬಾಧಿಸಿದೆ. ಮುಖ್ಯಮಂತ್ರಿಗಳು ತಕ್ಷಣ ನೆರೆಬಾಧಿತ ಪ್ರದೇಶಕ್ಕೆ ತೆರಳಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.
ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಕರ್ನಾಟಕಕ್ಕೆ ವಿಶೇಷ ಉದ್ಯಮಗಳು ಬರುವುದು ಖಚಿತವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದರು.
ಅಭ್ಯರ್ಥಿ ಆಯ್ಕೆ ವಿಳಂಬವಾಗಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಪಕ್ಷವು ಯುವಕರಿಗೆ ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅನುಭವವೂ ಬೇಕು ಎಂಬ ಆಶಯದಿಂದ “ಹಳೆ ಬೇರು ಹೊಸ ಚಿಗುರು ಕೂಡಿರಲು ಬಲು ಸೊಬಗು” ಎಂಬಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.
ಕುಟುಂಬಕ್ಕೆ ಬಂದ ಸೊಸೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅಂತೆಯೇ ಆಯ್ಕೆ ನಡೆದಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯದಿಂದ 20 ಹೆಸರುಗಳನ್ನು ಕಳುಹಿಸಲಾಗಿತ್ತು. 4 ಸೀಟಿಗೆ ನಾಲ್ಕೇ ಜನರಿಗೆ ಅವಕಾಶ ಕೊಡಲಾಗುತ್ತದೆ ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ